ಬೆಂಗಳೂರು: ಲೋಕಾಯುಕ್ತ ದಾಳಿಯಲ್ಲಿ ಖುದ್ದು ಪುತ್ರನೇ ಸಿಕ್ಕಿಬಿದ್ದಿರುವ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಚನ್ನಗಿರಿ ವಿಧಾನಸಭಾ ಕ್ಷೇತ್ರ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಕಳೆದ ರಾತ್ರಿಯೇ ಅಧ್ಯಕ್ಷ ಸ್ಥಾನಕ್ಕೆ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಿದ್ದಾರೆ. ಕಾನೂನಿಗೆ ತಲೆಬಾಗಿ ರಾಜೀನಾಮೆ ನೀಡುವುದಾಗಿ ಹೇಳಿರುವ ಮಾಡಾಳ್ ಅವರು, ಪಕ್ಷ ಮತ್ತು ಸರ್ಕಾರಕ್ಕೆ ಮುಜುಗರ ಉಂಟಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ನೀಡಿದ್ದೇನೆ.ಒಬ್ಬ ಜವಾಬ್ದಾರಿಯುತ ಜನಪ್ರತಿನಿಧಿಯಾಗಿ ದೇಶದ ಕಾನೂನಿಗೆ ತಲೆಬಾಗುವುದಾಗಿ ಮುಖ್ಯಮಂತ್ರಿ ಬಳಿ ಹೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.ಮಾಡಾಳ್ ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಂಗೀಕರಿಸಿದ್ದಾರೆ.
ಈಗಾಗಲೇ ಸರ್ಕಾರದ ವಿರುದ್ಧ ಶೇ. 40 ಕಮೀಷನ್ ಆರೋಪ ಕೇಳಿ ಬಂದಿದೆ. ಇದರ ಬೆನ್ನಲ್ಲೇ ಸ್ವತಃ ಶಾಸಕರ ಪುತ್ರನೇ ಟೆಂಡರ್ ನೀಡಲು ಗುತ್ತಿಗೆದಾರರಿಂದ ಲಂಚ ಪಡೆಯುವ ವೇಳೆ ಹಣದ ಸಮೇತ ಸಿಕ್ಕಿಬಿದ್ದಿರುವುದು ಬಿಜೆಪಿಗೆ ನುಂಗಲಾರದ ಬಿಸಿತುಪ್ಪವಾಗಿ ಪರಿಣಮಿಸಿದ್ದು, ಪ್ರತಿಪಕ್ಷಗಳು ಚುನಾವಣಾ ಸಂದರ್ಭದಲ್ಲಿ ಇದನ್ನೇ ಅಸ್ತ್ರ ಮಾಡಿಕೊಂಡರೆ ಫಲಿತಾಂಶದಲ್ಲಿ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಆತಂಕ ಕಾಡುತ್ತಿದೆ.ಇಷ್ಟು ದಿನ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ, ಎಲ್ಲಾ ಇಲಾಖೆಗಳಲ್ಲಿ, ಟೆಂಡರ್ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಹೇಳುತ್ತಾ ಬರುತ್ತಿದ್ದ ಕಾಂಗ್ರೆಸ್ಗೆ ಈಗ ಆಡಳಿತ ಪಕ್ಷದ ಮೇಲೆ ಹರಿಹಾಯಲು, ಚುನಾವಣಾ ಪ್ರಚಾರದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಹೊಸ ಅಸ್ತ್ರ ಸಿಕ್ಕಂತಾಗಿದೆ.