ಬೆಳಗಾವಿ:ಇಂದು ಆಂತರಿಕ ಮತದಾನ ನಡೆದಿದ್ದು ಅದರ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಕಾರ್ಯಕರ್ತರ ಅಭಿಪ್ರಾಯಗಳನ್ನು ತಿಳಿದು ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಅಭ್ಯರ್ಥಿಗಳ ಆಯ್ಕೆ ಕುರಿತು ಶುಕ್ರವಾರ ನಗರದ ಧರ್ಮನಾಥ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಪ್ರಹ್ಲಾದ್ ಜೋಶಿ, ನಮ್ಮ ಪಕ್ಷ ಕಾಂಗ್ರೆಸ್ ನಂತೆ ಕುಟುಂಬ, ವಂಶಾಡಳಿತದ ಪಕ್ಷವಲ್ಲ. ಕಾಂಗ್ರೆಸ್ ಪಕ್ಷವು ಸುಳ್ಳು ಭರವಸೆಗಳನ್ನು ನೀಡುವಲ್ಲಿ ಪರಿಣತಿ ಹೊಂದಿರುವ ಪಕ್ಷವಾಗಿದೆ. ಅವರ ಅವಧಿಯಲ್ಲಿ ಗ್ಯಾಸ್ ಬೆಲೆ ಎಷ್ಟು ಏರಿಕೆಯಾಗಿದೆ ಎಂದು ಕೇಳಿದರು. ಒಂದು ಕುಟುಂಬಕ್ಕೆ ವರ್ಷಕ್ಕೆ 78 ಸಾವಿರ ಕೊಡುತ್ತೇವೆ, ಗ್ಯಾರಂಟಿ ಕಾರ್ಡ್ ಕೊಡುತ್ತೇವೆ ಎಂದು ಹೇಳುತ್ತಾರಾದರೂ ಅವರು ಹೇಳಿದ್ದನ್ನು ಮಾಡಲೇ ಇಲ್ಲ. ರಾಜಸ್ಥಾನದಲ್ಲಿ ಕೊಟ್ಟ ಭರವಸೆಗಳನ್ನು ಇನ್ನೂ ಈಡೇರಿಸಿಲ್ಲ ಎಂದು ಟೀಕಿಸಿದರು. ಕಾಂಗ್ರೆಸ್ ನ ಗ್ಯಾರಂಟಿ ಕಾರ್ಡ್ ಕೆಲಸ ಮಾಡುತ್ತೋ ಇಲ್ಲವೋ ಗೊತ್ತಿಲ್ಲ, ಆದರೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಮನೆಗೆ ಹೋಗೋದು ಗ್ಯಾರಂಟಿ ಎಂದರು.ಬಿಜೆಪಿ ದೇಶ ಮತ್ತು ರಾಜ್ಯದಲ್ಲಿ ಜನತೆಗೆ ಉತ್ತಮ ಆಡಳಿತ ನೀಡಿದೆ. ಪ್ರಧಾನಿ ಮೋದಿಯವರ ದೂರದೃಷ್ಟಿಯ ನಾಯಕತ್ವದಲ್ಲಿ ಭಾರತ ಇಂದು ವಿಶ್ವದಲ್ಲೇ ಹೆಮ್ಮೆಯ ಸ್ಥಾನವನ್ನು ಗಳಿಸಿದೆ. ಅದರ ಹೊರತಾಗಿ ನಮ್ಮ ಆರ್ಥಿಕತೆಯೂ ಕ್ರಿಯಾಶೀಲವಾಗಿದೆ. ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರ ಜನರ ಕಲ್ಯಾಣಕ್ಕೆ ಆದ್ಯತೆ ನೀಡಿ ಹಲವು ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಿದೆ. ಮುಂಬರುವ ಚುನಾವಣೆಯ ಅಭ್ಯರ್ಥಿಗಳ ಆಯ್ಕೆಯನ್ನೂ ಪ್ರಜಾಸತ್ತಾತ್ಮಕ ನೆಲೆಯಲ್ಲಿ ನಿರ್ಧರಿಸಲಾಗುತ್ತಿದೆ. ಆದ್ದರಿಂದ ಪಕ್ಷದ ಪದಾಧಿಕಾರಿಗಳು, ತಳಮಟ್ಟದ ಬೂತ್ ಮಟ್ಟದ ಅಧಿಕಾರಿಗಳು, ಪಾಲಿಕೆ ಅಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮತ್ತು ರಾಜ್ಯ ಕೋರ್ ಕಮಿಟಿ, ರಾಜ್ಯ ಮಟ್ಟದ ಚುನಾವಣಾ ಸಮಿತಿಯ ಮಟ್ಟದಲ್ಲಿ ಅಭ್ಯರ್ಥಿಗಳ ಪ್ರತಿಕ್ರಿಯೆ ತಿಳಿದು ಅಂತಿಮ ಅಭ್ಯರ್ಥಿಯನ್ನು ನಿರ್ಧರಿಸಲಾಗುವುದು ಎಂದು ಪ್ರಹ್ಲಾದ ಜೋಶಿ ಹೇಳಿದರು.
ಈ ಸಭೆಯಲ್ಲಿ ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಮಾಜಿ ಶಾಸಕ ಸಂಜಯ ಪಾಟೀಲ, ಸಂಸದೆ ಮಂಗಲಾ ಅಂಗಡಿ, ಶಾಸಕ ಅನಿಲ್ ಬೆನಕೆ ಅವರೊಂದಿಗೆ ಬಿಜೆಪಿಯ ವಿವಿಧ ಶಾಖೆಗಳ ಹಲವು ಪದಾಧಿಕಾರಿಗಳು ಮತ್ತು ಮುಖಂಡರು ಉಪಸ್ಥಿತರಿದ್ದರು.