ಬೆಂಗಳೂರು: ರಾಜ್ಯ ಸಾರ್ವತ್ರಿಕ ಚುನಾವಣೆ ಸನ್ನಿಹದ ಬೆನ್ನಲ್ಲೆ ನಗರದ ಕುಖ್ಯಾತ ರೌಡಿ ಸೈಲೆಂಟ್ ಸುನೀಲನಿಗೆ ಅಮೃತಹಳ್ಳಿ ಪೊಲೀಸರು ಶಾಂತಿ ಮತ್ತು ಸುವ್ಯವಸ್ಥೆಗೆ ಮಾಡದಂತೆ ಎಚ್ಚರಿಕೆ ನೀಡಿ ಮುಚ್ಚಳಿಕೆ ಬರೆಸಿಕೊಂಡು ಖಡಕ್ ವಾರ್ನಿಂಗ್ ನೀಡಿ ಕಳುಹಿಸಿದ್ದಾರೆ.
ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸ ಮಾಡುತ್ತಿರುವ ಸುನೀಲ್ಕುಮಾರ್ ಅಲಿಯಾಸ್ ಸೈಲೆಂಟ್ ಸುನೀಲನನ್ನು ಪೊಲೀಸರು ಠಾಣೆಗೆ ಕರೆಸಿಕೊಂಡು ಆತನನ್ನು ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮೀಕಾಂತ್ ಅವರ ಮುಂದೆ ಹಾಜರುಪಡಿಸಿದ್ದರು.
ಈ ಸಂದರ್ಭದಲ್ಲಿ ಸೈಲೆಂಟ್ ಸುನೀಲನಿಗೆ ಚುನಾವಣೆ ಸಮಯದಲ್ಲಿ ಯಾವುದೆ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಬಾರದು ಹಾಗೂ ಶಾಂತಿ ಮತ್ತು ಸುವ್ಯವಸ್ಥೆಗೆ ಭಂಗ ತರಬಾರದು ಎಂದು ಡಿಸಿಪಿ ಲಕ್ಷ್ಮೀಕಾಂತ್ ಎಚ್ಚರಿಕೆ ನೀಡಿದ್ದಾರೆ.ಮಾತ್ರವಲ್ಲ, ಯಾವುದೆ ಅಪರಾಧ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದಿಲ್ಲ ಎನ್ನುವುದಕ್ಕೆ ಸಿಆರ್ಪಿಸಿ 110ರ ಕಾನೂನಿನಡಿಯಲ್ಲಿ ಹದಿನೈದು ಲಕ್ಷ ರೂ.ಗಳ ಬಾಂಡ್ನಲ್ಲಿ ಮುಚ್ಚಳಿಕೆ ಬರೆಸಿಕೊಂಡು ಕಳುಹಿಸಿದ್ದಾರೆ.