ರಾಜ್ಯ

ಟಿಕೆಟ್ ತಪ್ಪಿದ ಬೆನ್ನಲ್ಲೇ ಕಮಲ ಪಾಳಯದಲ್ಲಿ ಕಂಪನ..!

ಬಿಜೆಪಿಯಲ್ಲಿ ರಾಜೀನಾಮೆ ಪರ್ವ 
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿದ ಬೆನ್ನಲ್ಲೇ ಟಿಕೆಟ್ ವಂಚಿತರು ಪಕ್ಷದ ವಿರುದ್ಧವೇ ತಿರುಗಿ ಬಿದ್ದಿದ್ದು, ರಾಜೀನಾಮೆ ಕೊಡುವವರ ಪರ್ವ ಪ್ರಾರಂಭವಾಗಿದೆ. 
 
ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಈಗಾಗಲೇ ಬಿಜೆಪಿಗೆ ಗುಡ್‍ಬೈ ಹೇಳಿದ್ದರೆ, ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಕೂಡ ಪಕ್ಷ ಬಿಡುವ ಸುಳಿವು ಕೊಟ್ಟಿದ್ದು, ಜನಾರ್ದನರೆಡ್ಡಿ ನೇತೃತ್ವದ ಕೆಕೆಪಿಪಿ ಪಕ್ಷವನ್ನು ಸೇರ್ಪಡೆಯಾಗಲು ಸಜ್ಜಾಗಿದ್ದಾರೆ.ಸುಮಾರು 20ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದ್ದು, ವರಿಷ್ಠರ ಮನವೊಲಿಕೆಗೂ ಜಗ್ಗದ ಅಸಮಾಧಾನಿತರು ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಬೇರೆ ಬೇರೆ ಪಕ್ಷಗಳತ್ತ ಮುಖ ಮಾಡುತ್ತಿರುವುದು ಬಿಜೆಪಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.ಬೆಳಗಾವಿ ಜಿಲ್ಲೆ, ಅಥಣಿ ವಿಧಾನಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದ ಮಾಜಿ ಉಪಮುಖ್ಯಮಂತ್ರಿ ಹಾಗೂ ಗಾಣಿಗ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಪಕ್ಷದ ಪ್ರಾಥಮಿಕ ಸ್ಥಾನಕ್ಕೂ ರಾಜೀನಾಮೆ ಘೋಷಿಸಿರುವುದು ಕಮಲ ಪಾಳಯಕ್ಕೆ ಬರಸಿಡಿಲಿನಂತೆ ಅಪ್ಪಳಿಸಿದೆ.
 
ಮೂಲಗಳ ಪ್ರಕಾರ, ಸವದಿ ಗುರುವಾರ ಕಾಂಗ್ರೆಸ್ ಸೇರುವ ಸಾಧ್ಯತೆ ಹೆಚ್ಚಳವಾಗಿದ್ದು, ಅಥಣಿಯಿಂದಲೇ ಕೈ ಅಭ್ಯರ್ಥಿಯಾಗಿ ಸ್ಪರ್ದಿಸಲಿದ್ದಾರೆ. ಎನ್ನಲಾಗುತ್ತಿದೆ. ಸತತ ಆರು ಬಾರಿ ಗೆದ್ದಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕೂಡ ಅಸಮಾಧಾನಗೊಂಡಿದ್ದಾರೆ.ಸದ್ಯ ಬಿಜೆಪಿಯಲ್ಲಿ ಹೊತ್ತಿಕೊಂಡಿರುವ ಅಸಮಾಧಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ನಿಭಾಯಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಂಗ ಪ್ರವೇಶ ಮಾಡುವ ಲಕ್ಷಣಗಳು ಕಂಡುಬರುತ್ತಿಲ್ಲ.
TV24 News Desk
the authorTV24 News Desk

Leave a Reply