ದೇಶ

ಸಂಪುಟ ವಿಸ್ತರಣೆ ಕಸರತ್ತು: ಯುವಕರಿಗೆ ಆದ್ಯತೆ  

ನವದೆಹಲಿ ಸಚಿವ ಸಂಪುಟ ವಿಸ್ತರಣೆ ಸಂಬಂಧ ದೆಹಲಿಯಲ್ಲಿ ನಡೆಯುತ್ತಿರುವ ಕಸರತ್ತು ಮುಂದುವರೆದಿದ್ದು, ಮೊದಲ ಹಂತದಲ್ಲಿ 20ಕ್ಕೂ ಹೆಚ್ಚು ಮಂದಿ ಸಂಪುಟ ಸೇರುವುದು ಬಹುತೇಕ ಖಚಿತವಾಗಿದೆ. ಸಂಪುಟದಲ್ಲಿ ಖಾಲಿ ಇರುವ 24 ಸ್ಥಾನಗಳಿಗೆ ಶಾಸಕರನ್ನು ಆಯ್ಕೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಯ ಲ್ಲಿಂದು ಪಕ್ಷದ ಹೈಕಮಾಂಡ್ ಜೊತೆ ಸಭೆಗಳನ್ನು ನಡೆಸಿದ್ದಾರೆ.
 
ನಿನ್ನೆ ದೆಹಲಿ ತಲುಪಿದ ಇಬ್ಬರು ನಾಯಕರು ರಾತ್ರಿಯೇ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳ ಜೊತೆ ಮೊದಲ ಸುತ್ತಿನ ಚರ್ಚೆ ನಡೆಸಿದ್ದಾರೆ. ಇಂದು ಮತ್ತೆ ಒಂದು ಸುತ್ತಿನ ಸಭೆ ನಡೆಸಲಿದ್ದು, ಆರಂಭದಲ್ಲಿ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರುಗಳು ಪಾಲ್ಗೊಳ್ಳಲಿದ್ದಾರೆ.ಬಳಿಕ ಎಐಸಿಸಿ ಅಧ್ಯಕ್ಷೆ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಅಂತಿಮ ಚರ್ಚೆ ನಡೆಯಲಿದ್ದು, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಅವರ ಗಮನಕ್ಕೆ ತಂದು ಸಚಿವರ ಆಯ್ಕೆಯನ್ನು ಪೂರ್ಣಗೊಳಿಸುವ ಸಾಧ್ಯತೆ ಇದೆ.
 
ಈ ಬಾರಿ ಸಂಪುಟದಲ್ಲಿ ಯುವಕರಿಗೆ ಆದ್ಯತೆ ನೀಡಲು ನಿರ್ಧರಿಸಲಾಗಿದೆ. ಮೊದಲ ಹಂತದ ಸಂಪುಟದಲ್ಲಿ ಹಿರಿಯರಿಗೆ, ಅನುಭವಿಗಳಿಗೆ ಆದ್ಯತೆ ನೀಡಲಾಗಿದೆ. 2ನೇ ಹಂತದಲ್ಲಿ ಜಾತಿ ಮತ್ತು ಪ್ರಾದೇಶಿಕವಾರು ಪ್ರಾತಿನಿಧ್ಯಗಳೊಂದಿಗೆ ಯುವಕರಿಗೆ ಹೆಚ್ಚು ಅವಕಾಶಗಳನ್ನು ನೀಡಲು ಚರ್ಚೆಗಳು ನಡೆದಿವೆ.
ಸಂಭವನೀಯ ಸಚಿವರ ಪಟ್ಟಿ ತಯಾರಿಸಿರುವ ಸಿದ್ದರಾಮಯ್ಯ ತಮ್ಮ ಬಣದ 19 ಜನರ ಹೆಸರನ್ನು ಮುಂದಿಟ್ಟಿದ್ದಾರೆ. ಡಿ.ಕೆ.ಶಿವಕುಮಾರ್ 16ಕ್ಕೂ ಹೆಚ್ಚು ಮಂದಿ ಹೆಸರನ್ನು ಸೇರಿಸಿದ್ದಾರೆ.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೈದಾರಾಬಾದ್ ಕರ್ನಾಟಕ ಭಾಗಕ್ಕೆ ಐದು ಸ್ಥಾನಗಳನ್ನು ನೀಡಬೇಕೆಂದು ಸೂಚಿಸಿದ್ದು, ದೆಹಲಿಯಲ್ಲಿಂದು ತಮ್ಮ ಆಪ್ತರ ಜೊತೆ ಮಾತುಕತೆ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂದೇ ಸಚಿವರ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದಾಗಿ ತಿಳಿಸಿದ್ದಾರೆ. 2ರಿಂದ 3 ಸ್ಥಾನಗಳನ್ನು ಮಾತ್ರ ಬಾಕಿ ಉಳಿಸಿಕೊಂಡು ಉಳಿದ 20ರಿಂದ 22 ಸ್ಥಾನಗಳಿಗೆ ಸಚಿವರ ನೇಮಕಾತಿಯಾಗಲಿದೆ ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
TV24 News Desk
the authorTV24 News Desk

Leave a Reply