ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಿಎಂ
ಬೆಂಗಳೂರು: ಗ್ಯಾರಂಟಿಗಳ ಸ್ವತಃ ಸಚಿವರಿಗೆ ಮಾಹಿತಿ ಇದ್ದಂತೆ ಕಾಣುತ್ತಿಲ್ಲ. ಅವರೆಲ್ಲರೂ ಅರಬರೆ ಜ್ಞಾನದಿಂದ ಮಾತನಾಡುತ್ತಿದ್ದಾರೆ. ಅದು ಜನತೆಗೂ ಚೆನ್ನಾಗಿ ಅರ್ಥವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಾ ಪ್ರಹಾರ ಮಾಡಿದ್ದಾರೆ. ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ ಮುಖಂಡರ ಆತ್ಮಾವಲೋಕನ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.
ಮುಖ್ಯವಾಗಿ ಗೃಹಲಕ್ಷ್ಮಿ ಕಾರ್ಯಕ್ರಮದಲ್ಲಿ ಮತ್ತೊಂದು ಗೊಂದಲ ತಂದಿಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಮಾಜಿ ಮುಖ್ಯಮಂತ್ರಿ ಅವರು, ಅವರೊಬ್ಬ ಸಚಿವರಷ್ಟೇ ಅಲ್ಲ, ಬಹುತೇಕ ಎಲ್ಲ ಸಚಿವರಿಗೆ ಗ್ಯಾರಂಟಿಗಳ ಯಾವ ಗ್ಯಾರಂಟಿಯೂ ಇಲ್ಲ ಎಂದರು.ಇದು ಒಂದು ಕಾರ್ಯಕ್ರಮದ ಗೊಂದಲ ಅಲ್ಲ, ಐದು ಕಾರ್ಯಕ್ರಮಗಳ ಗೊಂದಲ. ಯಾರಿಗೂ ಯಾವ ಸ್ಪಷ್ಟತೆಯೂ ಇಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಗ್ಯಾರಂಟಿಗಳು ಲೇವಡಿಯ ವಸ್ತುವಾಗಿವೆ. ಮಾಧ್ಯಮಗಳಲ್ಲಿ ಕೂಡ ಇವುಗಳ ಬಗ್ಗೆ ಸಾಕಷ್ಟು ನಕಾರಾತ್ಮಕ ವರದಿಗಳು ಬರುತ್ತಿವೆ ಎಂದು ಕುಮಾರಸ್ವಾಮಿ ಅವರು ಉಲ್ಲೇಖ ಮಾಡಿದರು.