ಪತ್ನಿ ಹಾಗು ಸೋದರಳಿಯನನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಎಸಿಪಿ
ಪುಣೆ: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಸಹಾಯಕ ಪೊಲೀಸ್ ಆಯುಕ್ತರು (ಎಸಿಪಿ) ತನ್ನ ಪತ್ನಿ ಮತ್ತು ಸೋದರಳಿಯನನ್ನು ಕೊಂದು ನಂತರ ತಮ್ಮ ಸರ್ವಿಸ್ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. 57 ವರ್ಷದ ಎಸಿಪಿ ಭರತ್ ಗಾಯಕ್ವಾಡ್ ತನ್ನ ಪತ್ನಿ ಮೋನಿ (44) ಮತ್ತು ಸೋದರಳಿಯ ದೀಪಕ್ (35) ಅವರನ್ನು ಪುಣೆಯಲ್ಲಿ ಗುಂಡಿಕ್ಕಿ ಕೊಂದಿದ್ದಾರೆ. ಇದಾದ ಬಳಿಕ ತಾವು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೋಮವಾರ ಮುಂಜಾನೆ ೩.೩೦ ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಗಾಯಕ್ವಾಡ್ ಅವರ ಪತ್ನಿ ತಮ್ಮ ಇಬ್ಬರು ಮಕ್ಕಳೊಂದಿಗೆ ಪುಣೆಯಲ್ಲಿ ವಾಸಿಸುತ್ತಿದ್ದರು. ಗಾಯಕ್ವಾಡ್ ಅಮರಾವತಿಯಲ್ಲಿ ಎಸಿಪಿಯಾಗಿ ನೇಮಕಗೊಂಡಿದ್ದರು ನಿನ್ನೆ ತಮ್ಮ ಮನೆಗೆ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ನಂತರ, ಕುಟುಂಬ ಸದಸ್ಯರು ಪೊಲೀಸರಿಗೆ ಮಾಹಿತಿ ನೀಡಿದರು, ಮೂವರನ್ನು ಜೂಪಿಟರ್ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು. ಈ ಘಟನೆಯ ಹಿಂದಿನ ಕಾರಣ ಬಹಿರಂಗವಾಗಿಲ್ಲ ಪೊಲೀಸರು ಈ ಬಗ್ಗೆ ತನಿಖೆ ಮುಂದುವರೆಸಿದ್ದಾರೆ.