ಬೆಳಗಾವಿ: ಶನಿವಾರ ನಗರದ ಕುಮಾರ ಗಂಧರ್ವ ರಂಗ ಮಂದಿರದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಅತೀ ಹೆಚ್ಚು ಸ್ಥಾನ ಗೆಲ್ಲಿಸಬೇಕು. ಆದ್ದರಿಂದ ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕೆಂದು ಇತ್ತೀಚೆಗೆ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಎಲ್ಲರಿಗೂ ಸೂಚನೆ ನೀಡಿದ್ದಾರೆ. ನಮ್ಮ ಜಿಲ್ಲೆಯಲ್ಲಿ ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸುವುದು ನಮ್ಮ ಡ್ಯೂಟಿ ಇದೆ. ಅದನ್ನು ಮಾಡುತ್ತೇವೆ. ಈಗಾಗಲೇ ಬೆಂಗಳೂರಿನಲ್ಲಿ ಒಂದು ಬಾರಿ ಅಭ್ಯರ್ಥಿ ಆಯ್ಕೆಯ ಬಗ್ಗೆ ಚರ್ಚೆಯಾಗಿದೆ. ಎರಡನೇ ಬಾರಿ ಆದಷ್ಟು ಬೇಗ ಬೆಳಗಾವಿಯಲ್ಲಿ ಸಭೆ ಮಾಡಿ ಚರ್ಚೆ ಮಾಡುತ್ತೇವೆ ಎಂದರು.
ಹೈಕಮಾಂಡ್ ನನಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ನಡೆಸಬೇಕೆಂದು ಸೂಚನೆ ನೀಡಿಲ್ಲ. ಆಕಾಂಕ್ಷಿ ಅಭ್ಯರ್ಥಿಗಳನ್ನು ಹುಡುಕಾಟ ನಡೆಸಬೇಕಿದೆ. ಹಾಲಿ ಹಾಗೂ ಮಾಜಿ ಸಚಿವರಿಗೆ ಸ್ಪರ್ಧೆ ಮಾಡಬೇಕೆಂದು ಎಲ್ಲಿಯೂ ಹೇಳಿಲ್ಲ. ಗೆಲ್ಲುವ ಅಭ್ಯರ್ಥಿಗೆ ಮಣೆ ಹಾಕಿ ಅವರಿಗೆ ಅವಕಾಶ ಕೊಡುತ್ತೇವೆ. ವಿಧಾನಸಭಾ ಚುನಾವಣೆಯ ಮಾದರಿಯಲ್ಲಿ ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಎದುರಿಸಲಿದೆ. ಆದರೆ ಈ ಚುನಾವಣೆಯಲ್ಲಿ ಹೆಚ್ಚಿನ ಜವಾಬ್ದಾರಿ ಇದೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಉದ್ಯಮಬಾಗ ಪೊಲೀಸರು ವಿಕಲಚೇತನನ ಮೇಲೆ ಹಲ್ಲೆ ಮಾಡಿರುವ ವಿಷಯಕ್ಕೆ ಪ್ರತಿಕ್ರಿಯಿಸಿದ ಅವರು, ಹಲ್ಲೆ ಮಾಡಿದ ವಿಡಿಯೋ ನೋಡಿದ್ದೇನೆ. ಈ ಕುರಿತು ನಗರ ಪೊಲೀಸರೊಂದಿಗೆ ಚರ್ಚೆ ನಡೆಸುತ್ತೇನೆ ಎಂದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಣ್ಣದ ಬಗ್ಗೆ ಮಾಜಿ ಸಚಿವ ಆರಗ್ ಜ್ಞಾನೇಂದ್ರ ನೀಡಿರುವ ಹೇಳಿಕೆಯ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಇಂಥ ಹೇಳಿಕೆ ನೀಡುತ್ತಿರುತ್ತಾರೆ. ಆ ಹೇಳಿಕೆಯನ್ನು ಅವರು ವಾಪಸ್ಸು ಪಡೆದಿದ್ದಾರೆ. ಬಿಜೆಪಿಯವರು ಕ್ಷಮೆ ಕೇಳಿದ್ದಾರೆ. ಅದು ಮುಗಿದ ಹೋದ ಅಧ್ಯಾಯ. ಅದನ್ನು ಮುಂದುವರೆಸುವ ಅಗತ್ಯ ಇಲ್ಲ ಎಂದರು.
ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡುವ ಕುರಿತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಚರ್ಚೆ ನಡೆಯಿತಾ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಾಕಷ್ಟು ವಿಚಾರಗಳು ಇವೆ. ಕಳೆದ 10 ವರ್ಷಗಳಿಂದ ಆಗದ ಕೆಲಸಗಳ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಆದಷ್ಟು ಬೇಗ ನಮ್ಮ ರಾಜ್ಯಕ್ಕೆ ಪರಿಹಾರ ಕೊಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.