ಬೆಂಗಳೂರು: ವಿಧಾನಸಭೆ ಚುನಾವಣೆಯ ಸೋಲಿನಿಂದ ಎಚ್ಚೆತ್ತುಕೊಂಡಿರುವ ಬಿಜೆಪಿ ದೆಹಲಿ ನಾಯಕರು ಇದೀಗ ಅಳೆದೂ ತೂಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಪುತ್ರ ಶಾಸಕ ಬಿ.ವೈ.ವಿಜಯೇಂದ್ರಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡಲು ಒಲವು ತೋರಿದ್ದಾರೆ. ಹಾಲಿ ರಾಜ್ಯಾಧ್ಯಾಕ್ಷ ನಳೀನಕುಮಾರ್ ಕಟೀಲ್ ಅವರ ಅಧಿಕಾರವಧಿ ಈಗಾಗಲೇ ಮುಗಿದಿದ್ದು, ಯಾವುದೇ ಸಂದರ್ಭದಲ್ಲಿ ಅವರು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ.
ತೆರವಾಗಲಿರುವ ಈ ಸ್ಥಾನಕ್ಕೆ ಹಲವರ ಹೆಸರುಗಳು ಕೇಳಿಬಂದಿವೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾಜಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ಅಶ್ವತ್ಥ ನಾರಾಯಣ ಸೇರಿದಂತೆ ದಿನಕ್ಕೊಂದು ಹೆಸರುಗಳು ಸೇರ್ಪಡೆಯಾಗುತ್ತಲಿವೆ.
ವಿಧಾನಸಭೆ ಚುನಾವಣೆ ಮುಗಿದು ನಾಲ್ಕು ತಿಂಗಳು ಕಳೆದರೂ, ಕರ್ನಾಟಕದ ಬಿಜೆಪಿ ಬೆಳವಣಿಗೆಗಳ ಬಗ್ಗೆ ದೆಹಲಿ ನಾಯಕರು ತಲೆಯನ್ನೇ ಕೆಡಿಸಿಕೊಂಡಿಲ್ಲ. ದಿಕ್ಕಿಲ್ಲದೆ ನಾವಿಕನಂತಾಗಿರುವ ಪಕ್ಷದ ಸ್ಥಿತಿಗತಿಗಳ ಬಗ್ಗೆ ವರದಿಯನ್ನೂ ಕೇಳಿಲ್ಲ.ವಿಧಾನಸಭೆ ಚುನಾವಣೆ ಹೀನಾಯ ಸೋಲು ಎಷ್ಟು ಆಕ್ರೋಶವುಂಟು ಮಾಡಿದೆ ಎಂದರೆ ಈವರೆಗೂ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜು ಬೊಮ್ಮಾಯಿ ಹೊರತುಪಡಿಸಿದರೆ ಕರ್ನಾಟಕದ ಯಾವ ನಾಯಕರನ್ನೂ ಮುಖ ನೋಡಲು ಹಿಂದೇಟು ಹಾಕುತ್ತಿದ್ದಾರೆ.
ಇದೀಗ ಪಕ್ಷದ ಸಾಲು ಸಾಲು ನಾಯಕರು ಬಿಜೆಪಿ ಬಿಟ್ಟು ಹೋಗುತ್ತಿರುವುದರಿಂದ ಎಚ್ಚೆತ್ತುಕೊಂಡಿರುವ ಹೈಕಮಾಂಡ್ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನುಗ್ಗುವ ಹಾಗೂ ಪ್ರಬಲ ಜಾತಿಗೆ ಸೇರಿರುವ ವಿಜಯೇಂದ್ರಗೆ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ಚಿಂತನೆ ನಡೆಸಿದೆ.
ವಿಧಾನಸಭಾ ಚುನಾವಣೆಯ ಬಳಿಕ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಹೊಸ ನಾಯಕನ ಹುಡುಕಾಟವನ್ನು ಹೈಕಮಾಂಡ್ ನಡೆಸುತ್ತಿದೆ ಎನ್ನಲಾಗಿದೆ. ಇತ್ತ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ಲಿಂಗಾಯತ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಪುತ್ರನ ಪರ ಲಾಬಿ ಮಾಡುತ್ತಿದ್ದಾರೆ ಎಂಬ ಮಾತು ಬಿಜೆಪಿ ಪಾಳಯದಲ್ಲಿ ಕೇಳಿ ಬರುತ್ತಿದೆ.