ಮಹಾನಗರ ಪಾಲಿಕೆ ಕೆಲವು ಷರತ್ತುಗಳನ್ನು ವಿಧಿಸುವ ಮೂಲಕ ಅನುಮತಿ
ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಟಾಪನೆ ವಿಷಯ ಕುರಿತಂತೆ ಕಳೆದ ಹಲವು ದಿನಗಳಿಂದ ನಡೆದಿದ್ದ ವಾದ-ವಿವಾದಗಳಿಗೆ ತೆರೆ ಬಿದ್ದಿದ್ದು, ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಮಹಾನಗರ ಪಾಲಿಕೆ ಕೆಲವು ಷರತ್ತುಗಳನ್ನು ವಿಧಿಸುವ ಮೂಲಕ ಅನುಮತಿ ನೀಡಿದೆ.
ಅನುಮತಿ ಪತ್ರದೊಂದಿಗೆ ಪಾಲಿಕೆಯ ಕಚೇರಿಗೆ ಆಗಮಿಸಿದ ಆಯುಕ್ತ ಈಶ್ವರ ಉಳ್ಳಾಗಡ್ಡಿ ಪ್ರತಿಭಟನಾಕಾರರನ್ನು ಭೇಟಿ ಮಾಡಿದರು. ಶಾಸಕರಾದ ಅರವಿಂದ ಬೆಲ್ಲದ, ಮಹೇಶ್ ಟೆಂಗಿನಕಾಯಿ, ಪಾಲಿಕೆ ಸದಸ್ಯರೊಂದಿಗೆ ಮಾತುಕತೆ ನಡೆಸಿದರು. ಈದ್ಗಾ ಮೈದಾನದಲ್ಲಿ ಮೂರು ದಿನಗಳ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡಿರುವ ಪತ್ರವನ್ನು ನೀಡಿದರು.
ಷರತ್ತುಗಳಲ್ಲಿ ಏನಿದೆ?
- ಕಡ್ಡಾಯವಾಗಿ ಪೊಲೀಸ್ ಆಯುಕ್ತರಿಂದ ಅನುಮತಿ.
- ಸೆ. 19 ರಂದು ಬೆಳಿಗ್ಗೆ 6 ಗಂಟೆಯಿಂದ ಸೆ. 21 ರಂದು ಮಧ್ಯಾಹ್ನ 12 ಗಂಟೆಯವರೆಗೆ ಗಣೇಶ ಪ್ರತಿಷ್ಠಾಪನೆಗೆ ಅನುಮತಿ.
- 30*30 ಅಳತೆಯ ಪೆಂಡಾಲ್.
- ಗಣೇಶ ಉತ್ಸವದ ಹೊರತಾಗಿ ಯಾವುದೇ ಬಾವುಟ, ಭಿತ್ತಿಪತ್ರ, ವಿವಾದಿತ ಫೋಟೋ ಪ್ರದರ್ಶನ ನಿಷೇಧ.
- ಮನರಂಜನಾ ಕಾರ್ಯಕ್ರಮಗಳೂ ನಿಷೇಧ.
- ಅನವಶ್ಯಕ ಗಲಭೆ, ಗಲಾಟೆಗಳಿಗೆ ಆಯೋಜಕರೆ ಹೊಣೆ.
- ಅನ್ಯಧರ್ಮೀಯರ ಭಾವನೆಗಳಿಗೆ ಧಕ್ಕೆ ತರುವಂತಿಲ್ಲ,
- ಪ್ರಚೋದನಕಾರಿ ಹೇಳಿಕೆ, ಭಾಷಣ ನಿಷೇಧ ಸೇರಿದಂತೆ 18 ಷರತ್ತುಗಳನ್ನು ವಿಧಿಸಿದ ಮಹಾನಗರ ಪಾಲಿಕೆ.
ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿ, ಕಾಂಗ್ರೆಸ್ ಹಿಂಬಾಗಿಲಿನಿಂದ ಅಂಜುಮನ್ ಸಂಸ್ಥೆ ಮೂಲಕ ಕೋರ್ಟ್ ರಿಟ್ ಅರ್ಜಿ ಸಲ್ಲಿಸಿತ್ತು. ಕೊನೆ ಕ್ಷಣದಲ್ಲಿಯಾದ್ರೂ ಸರ್ಕಾರ ಎಚ್ಚೆತ್ತುಕೊಂಡು ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಿದೆ. ಮುಂದೆ ಕೂಡ ಹಿಂದೂ ಹಬ್ಬಗಳ ಆಚರಣೆಗೆ ಅಡೆತಡೆಗಳನ್ನು ಒಡ್ಡಬಾರದು. ನ್ಯಾಯಾಲಯ ಅತ್ಯುತ್ತಮ ತೀರ್ಪು ಕೊಟ್ಟಿದೆ, ನಮಗೆ ದೊಡ್ಡ ಜಯ ಸಿಕ್ಕಿದೆ. ಈದ್ಗಾ ಮೈದಾನದಲ್ಲಿ ವಿಜೃಂಭಣೆಯಿಂದ ಹಬ್ಬ ಆಚರಣೆ ಮಾಡುತ್ತೇವೆ ಎಂದು ಹೇಳಿದರು.