ಬೆಂಗಳೂರು: ಬಿಜೆಪಿ ಟಿಕೆಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಮತ್ತು ಅವರ ಗ್ಯಾಂಗ್ನಿಂದ ಈವರೆಗೆ ನಗದೂ ಸೇರಿದಂತೆ ಎರಡು ಕೋಟಿಗೂ ಹೆಚ್ಚು ಮೌಲ್ಯದ ವಸ್ತುಗಳನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆಂದು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಎಂಟು ಮಂದಿಯನ್ನು ಬಂಧಿಸಿ ಕೂಲಂಕುಶವಾಗಿ ವಿಚಾರಣೆಗೊಳಪಡಿಸಿ ಮಾಹಿತಿಗಳನ್ನು ಪಡೆದುಕೊಳ್ಳಲಾಗುತ್ತದೆ ಎಂದು ಅವರು ವಿವರಿಸಿದರು.
ಚೈತ್ರಾ ಕುಂದಾಪುರ ಅವರಿಂದ ಡಿಡಿ, ಚಿನ್ನಾಭರಣ, ಕಾರು, ಹಣ ವಶಕ್ಕೆ ಪಡೆಯಲಾಗಿದೆ. ಪ್ರಕರಣದ ಮೂರನೇ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿ ಮಠದಿಂದ 56 ಲಕ್ಷ ರೂ. ಹಾಗೂ ಮತ್ತೊಬ್ಬ ವ್ಯಕ್ತಿಯಿಂದ 20 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ. ಹೀಗೆ ಎಲ್ಲರ ವಿಚಾರಣೆಗೊಳಪಡಿಸಿ ಅವರಿಂದ ಹಣ ಇನ್ನಿತರ ವಸ್ತುಗಳನ್ನು ರಿಕವರಿ ಮಾಡಲಾಗುತ್ತಿದೆ ಎಂದರು.