ರಾಜ್ಯ

ನಾಳೆ ರಾಜ್ಯಕ್ಕೆ ಬರ ಸಮೀಕ್ಷೆ ಟೀಂ..! 

9ರವರೆಗೆ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಜಿಲ್ಲೆಗೆ ಭೇಟಿ 
 ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ರೈತನ ಸಂಕಷ್ಟ ಹೇಳತೀರದಾಗಿದೆ. ಮುಂಗಾರು ಮಳೆ ಇಲ್ಲದೇ ಬರಗಾಲ ಪರಿಸ್ಥಿತಿ ಎದುರಾಗಿದೆ. ಹಾಗಾಗಿ ಬರ ಸಮೀಕ್ಷೆ ಗಾಗಿ ನಾಳೆ ರಾಜ್ಯಕ್ಕೆ ಕೇಂದ್ರ ಸರ್ಕಾರದ ಮೂರು ತಂಡ ಭೇಟಿ ನೀಡಲಿದೆ.
ನಾಳೆಯಿಂದ ಅ.9ರವರೆಗೆ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಚಿತ್ರದುರ್ಗ, ಹಾವೇರಿ, ಗದಗ, ಕೊಪ್ಪಳ, ವಿಜಯನಗರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ ಒಟ್ಟು 12 ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಿದ್ದಾರೆ. ಆದರೆ ಪ್ರವಾಸಕ್ಕೂ ಮುನ್ನ ನಾಳೆ ಕೇಂದ್ರ ತಂಡದ ಜತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ.
ಈಗಾಗಲೇ 195 ತಾಲೂಕುಗಳು ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಿದ್ದು, ಕೇಂದ್ರದ ಬಳಿ 6 ಸಾವಿರ ಕೋಟಿ ರೂ. ಪರಿಹಾರವನ್ನು ಕೇಳಿದೆ. 161 ತಾಲೂಕುಗಳಲ್ಲಿ ತೀವ್ರವಾದ ಬರ ಪರಿಸ್ಥಿತಿ ಇದೆ. 34 ತಾಲೂಕುಗಳಲ್ಲಿ ಸಾಧಾರಣ ಬರದ ಪರಿಸ್ಥಿತಿ. ಒಟ್ಟು 195 ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಇದೆ. ಉಳಿದ 40 ತಾಲೂಕುಗಳಲ್ಲಿ ಮಳೆ ಕೊರತೆ ಇದ್ದರೂ ಕೂಡ ತೇವಾಂಶ ಕೊರತೆ ಕಂಡು ಬರುತ್ತಿಲ್ಲ. ಮಾರ್ಗಸೂಚಿಗಳ ಪ್ರಕಾರ, ಮಧ್ಯಮ ಬರಕ್ಕೆ ಕೇಂದ್ರ ಸರ್ಕಾರ ಪರಿಹಾರ ಕೊಡಬಹುದು ಅಥವಾ ಇಲ್ಲದೇ ಇರಬಹುದು. ಬರ ಘೋಷಣೆ ಮನವಿಗೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಎಲ್ಲ ಬರ ಪೀಡಿತ ತಾಲೂಕುಗಳಲ್ಲಿ ಟಾಸ್ಕ್‌ ಫೋರ್ಸ್ ರಚನೆ ಮಾಡಲು ಸೂಚನೆ ನೀಡಿದ್ದೇವೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದರು.
ಈ ಮುಂಚೆ 113 ತಾಲೂಕುಗಳನ್ನು ಆಯ್ಕೆ ಮಾಡಿಕೊಂಡು ಬೆಳೆ ಸಮೀಕ್ಷೆಗೆ ಆದೇಶ ನೀಡಲಾಗಿತ್ತು. 62 ತಾಲೂಕುಗಳಲ್ಲಿ ಬರಕ್ಕೆ ಅರ್ಹ ವಿವರ ಬಂದಿತ್ತು. ಸಚಿವ ಸಂಪುಟದಲ್ಲೂ ವಿಸ್ತ್ರತ ಚರ್ಚೆಯಾಗಿತ್ತು. ಆಗ 62 ತಾಲೂಕುಗಳು ಮಾತ್ರವಲ್ಲ ಇನ್ನೂ ಹೆಚ್ಚಿನ ತಾಲೂಕುಗಳಲ್ಲಿ ಬರ ಸ್ಥಿತಿ ಇದೆ ಎಂದು ಚರ್ಚೆಯಾಗಿತ್ತು. ಹೀಗಾಗಿ ಉಳಿದ 134 ತಾಲೂಕುಗಳಲ್ಲಿ ಸಮೀಕ್ಷೆ ಮಾಡಲು ಆದೇಶಿಸಲಾಗಿತ್ತು.
ಬೆಳೆ ಬೆಳೆದು ಬದುಕು ಸಾಗಿಸಬೇಕಿದ್ದ ಅನ್ನದಾತ ಬರಡು ಭೂಮಿಯಲ್ಲಿ ಆಕಾಶ ನೋಡುತ್ತಾ ಕುಳಿತುಕೊಳ್ಳುವ ಭೀಕರ ಪರಿಸ್ಥಿತಿ ಎದುರಾಗಿದೆ. ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಜಿಲ್ಲೆ ಜಿಲ್ಲೆಯಲ್ಲೂ ಬರದ ಆರ್ತನಾದ ಕೇಳಿಬರುತ್ತಿದೆ. ಸಾಲಸೋಲ ಮಾಡಿ ಬೆವರು ಸುರಿಸಿ ಬಿತ್ತನೆ ಮಾಡಿದ್ದ ಬೆಳೆಯನ್ನ ರೈತರೇ ತಮ್ಮಕೈಯಾರೆ ಕಿತ್ತು ಹಾಕುತ್ತಿದ್ದಾರೆ.
TV24 News Desk
the authorTV24 News Desk

Leave a Reply