ಬೆಳಗಾವಿ: ರಾಜ್ಯದಲ್ಲಿ ಮತ್ತೆ ಕೊರೋನಾ ಆತಂಕ ಶುರುವಾಗಿದ್ದು, ಆರೋಗ್ಯ ಇಲಾಖೆ ಹೈಅಲರ್ಟ್ ಆಗಿದೆ. ಇನ್ನು ಗಡಿ ಜಿಲ್ಲೆ ಬೆಳಗಾವಿಯಲ್ಲೂ ಸಹ ಕಟ್ಟುನಿಟ್ಟಿನ ಕ್ರಮಕ್ಕೆ ಇಲ್ಲಿನ ಅಧಿಕಾರಿಗಳು ಮುಂದಾಗಿದ್ದಾರೆ.
ಈ ಬಗ್ಗೆ ಇಂದು ಚಿಕ್ಕೋಡಿ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಶಾಸಕ ಗಣೇಶ್ ಹುಕ್ಕೇರಿ ನೇತೃತ್ವದಲ್ಲಿ ಕೋವಿಡ್ ಸಭೆ ನಡೆದಿದ್ದು, ನೆಗಡಿ, ಕೆಮ್ಮು ಜ್ವರದ ಲಕ್ಷಣ ಇದ್ದವರಿಗೆ ಆರ್ಟಿಪಿಸಿಆರ್ ಟೆಸ್ಟ್ ಕಡ್ಡಾಯ ಹಾಗೂ ಕೇರಳದ ಶಬರಿಮಲೆಗೆ ತೆರಳಿದವರಿಗೂ ಕಡ್ಡಾಯವಾಗಿ ತಪಾಸಣೆ ಮಾಡುವಂತೆ ಸೂಚನೆ ನೀಡಿದ್ದಾರೆ.
ಮಹಾರಾಷ್ಟ್ರ ಕರ್ನಾಟಕ ಗಡಿಯಲ್ಲಿ ಹೆಚ್ಚಿನ ನಿಗಾ ವಹಿಸುವ ಕುರಿತು ಚರ್ಚೆ ನಡೆದಿದ್ದು, ಡಿಸೆಂಬರ್ 23ರಿಂದ ಪ್ರತಿ ತಾಲೂಕಿನಲ್ಲಿ 5 ಸಾವಿರ ಕೋವಿಡ್ ತಪಾಸಣೆಗೆ ಸೂಚನೆ ನೀಡಲಾಗಿದೆ. ಪಿಹೆಚ್ಸಿ, ಸಿಹೆಚ್ಸಿ ತಾಲೂಕು ಆಸ್ಪತ್ರೆಯಲ್ಲಿ RTPCR ಟೆಸ್ಟ್ಗೆ ನಿರ್ಧರಿಸಲಾಗಿದೆ. ಮಹಾರಾಷ್ಟ್ರದಿಂದ ಬರುವವರ ಮೇಲೆ ಕೋವಿಡ್ ತಪಾಸಣೆಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಾಗೇ ನೆಗಡಿ, ಕೆಮ್ಮು ಜ್ವರದ ಲಕ್ಷಣ ಇದ್ದವರಿಗೆ ಆರ್ಟಿಪಿಸಿಆರ್ ಟೆಸ್ಟ್ ಕಡ್ಡಾಯ ಮಾಡಲಾಗಿದ್ದು, ಕೇರಳದ ಶಬರಿಮಲೆಗೆ ತೆರಳಿದವರಿಗೂ ಕಡ್ಡಾಯ ತಪಾಸಣೆಗೆ ಸೂಚಿಸಲಾಗಿದೆ. ಅಲ್ಲದೇ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಬೆಡ್ ಇರಿಸಬೇಕೆಂದು ಶಾಸಕ ಗಣೇಶ್ ಹುಕ್ಕೇರಿ ಸೂಚನೆ ನೀಡಿದ್ದಾರೆ. ಈ ಸಭೆಯಲ್ಲಿ ತಾಲೂಕು ಕಂದಾಯ ಇಲಾಖೆ, ಪೊಲೀಸ್, ಆರೋಗ್ಯ ಇಲಾಖೆ ಹಾಗೂ ಸ್ಥಳಿಯ ಸಂಸ್ಥೆಗಳ ಅಧಿಕಾರಿಗಳು ಭಾಗಿಯಾಗಿದ್ದರು.