ಸ್ಥಳೀಯ ಬಿಜೆಪಿಗರಿಂದಲೇ ವಿರೋಧ, ಸ್ಥಳೀಯರಿಗೆ ಟಿಕೆಟ್ ನೀಡಲು ಆಗ್ರಹ!
ಬೆಳಗಾವಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಘೋಷಣೆಯಾಗುವ ಹಂತದಲ್ಲಿರುವಾಗಲೇ ಬೆಳಗಾವಿ ಜಿಲ್ಲೆಯ ಬಿಜೆಪಿ ಮುಖಂಡರ ಅಸಮಾಧಾನ ಸ್ಫೋಟಗೊಂಡಿದೆ. ಶುಕ್ರವಾರ ನಗರದಲ್ಲಿ ಜಿಲ್ಲೆಯ ಬಿಜೆಪಿ ಮುಖಂಡರ ಸಭೆ ನಡೆದಿದ್ದು, ಸ್ಥಳೀಯರನ್ನೇ ಅಭ್ಯರ್ಥಿಯಾಗಿ ಆಯ್ಕೆ ಮಾಡುವಂತೆ ಪಕ್ಷದ ರಾಷ್ಟ್ರೀಯ ಮುಖಂಡರ ಮನವೊಲಿಸಲು ನಿರ್ಧರಿಸಲಾಗಿದೆ.
ಹುಬ್ಬಳ್ಳಿ-ಧಾರವಾಡ, ಹಾವೇರಿ ಅಥವಾ ಬೆಳಗಾವಿ ಕ್ಷೇತ್ರದಿಂದ ಕಣಕ್ಕಿಳಿಯುವ ಬಗ್ಗೆ ಶೆಟ್ಟರ್ ಬಿಜೆಪಿ ವರಿಷ್ಠರ ಜತೆ ಚರ್ಚೆ ನಡೆಸಿದ್ದರು. ಈ ಪೈಕಿ ಹುಬ್ಬಳ್ಳಿ-ಧಾರವಾಡ ಮತ್ತು ಹಾವೇರಿ ಕ್ಷೇತ್ರಗಳಲ್ಲಿ ಈಗಾಗಲೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಸರು ಅಂತಿಮವಾಗಿದೆ. ಶೆಟ್ಟರ್ ಅವರಿಗೆ ಪ್ರಸ್ತುತ ಬೆಳಗಾವಿ ಕ್ಷೇತ್ರವೇ ಅಂತಿಮ ಎನ್ನಲಾಗುತ್ತಿದೆ. ಈ ಸುದ್ದಿ ಖಚಿತವಾಗುತ್ತಿದ್ದಂತೆ ಬೆಳಗಾವಿಯ ಬಿಜೆಪಿ ಮುಖಂಡರು ಸಿಡಿಮಿಡಿಗೊಳ್ಳುವ ಹಂತ ತಲುಪಿದ್ದಾರೆ. ಬೆಳಗಾವಿಯಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಿದ ಅನೇಕ ನಾಯಕರಿರುವಾಗ ಹೊರಗಿನ ಅಭ್ಯರ್ಥಿಗೆ ಮಣೆ ಹಾಕುವ ಅಗತ್ಯವೇನು? ಎಂಬುದು ಜಿಲ್ಲೆಯ ಬಿಜೆಪಿ ಮುಖಂಡರ ಪ್ರಶ್ನೆ.
ಶುಕ್ರವಾರ ಬೆಳಗ್ಗೆಯಿಂದಲೇ ಜಿಲ್ಲಾ ಬಿಜೆಪಿ ಮುಖಂಡರ ಸಭೆ ನಗರದಲ್ಲಿ ನಡೆಯಿತು. ಮಧ್ಯಾಹ್ನದ ಬಳಿಕ ಡಾ ಪ್ರಭಾಕರ ಕೋರೆ ಅವರ ಮನೆಗೆ ತೆರಳಿ ಚರ್ಚೆ ಮಾಡಲಾಯಿತು. ಜಗದೀಶ್ ಶೆಟ್ಟರ್ ಅವರನ್ನು ಬೆಳಗಾವಿ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆ ಮಾಡುವುದನ್ನು ಮುಖಂಡರು ಒಕ್ಕೊರಲಿನಿಂದ ತಿರಸ್ಕರಿಸಿದರು. ಸ್ಥಳೀಯರಿಗೇ ಟಿಕೆಟ್ ನೀಡುವಂತೆ ಪಕ್ಷದ ಹೈ ಹೈ ಕಕಮಾಂಡ್ಗೆ ಒತ್ತಾಯಿಸಲು ನಿರ್ಣಯಿಸಲಾಯಿತು.