ಗದಗ : ಗದಗ ಜಿಲ್ಲೆಯಲ್ಲಿ ಕೆಲ ದಿನಗಳ ಹಿಂದೆ ಬಿಟ್ಟು ಬಿಡದೆ ಭಾರಿ ಪ್ರಮಾಣದ ಮಳೆಯಿಂದ ಜಿಲ್ಲಾ ಕೇಂದ್ರದ ಪ್ರಮುಖ ರಸ್ತೆಗಳು ಸಂಪೂರ್ಣ ಹದಗೆಟ್ಟು ಹೋಗಿದ್ದು ಈಗಾಗಲೇ ಸರ್ಕಾರದ ಗಮನಕ್ಕೆ ತಂದು ರಸ್ತೆ ಸುಧಾರಣೆ ಕಾಮಗಾರಿಗೆ ಗದಗ ಮತ ಕ್ಷೇತ್ರಕ್ಕೆ 35 ಕೋಟಿ ರೂ, ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ಹೇಳಿದರು.ಪ್ರವಾಸ ಮಂದಿರದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಅವರು ಮಾತನಾಡಿದರು.
ಸುಮಾರು 35ಕೋಟಿ ರೂ, ವೆಚ್ಚದಲ್ಲಿ ರಸ್ತೆ ಸುಧಾರಣೆ ಕಾಮಗಾರಿಗಳಿಗೆ ಜುಲೈ ತಿಂಗಳಲ್ಲಿಯೇ ಚಾಲನೆ ನೀಡಲಾಗಿದ್ದು, ಗುತ್ತಿಗೆದಾರರಿಗೆ ಶೀಘ್ರವಾಗಿ ಉತ್ತಮ ಗುಣಮಟ್ಟದ ಕಾಮಗಾರಿಯನ್ನು ಕೈಗೊಳ್ಳುವಂತೆ ಈಗಾಗಲೇ ಸೂಚಿಸಲಾಗಿದೆ. ಆದಷ್ಟು ಬೇಗನೆ ಇಲಾಖೆಯ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ರಸ್ತೆ ಸುಧಾರಣೆ ಕಾಮಗಾರಿಗಳನ್ನು ಕೈಗೊಳ್ಳಬೇಕು. ಅಲ್ಲದೆ, ಗದಗ, ನರಗುಂದ ಸೇರಿದಂತೆ ಜಿಲ್ಲೆಯ ನಾಲ್ಕು ಮತಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದರು.