ಬೆಳಗಾವಿ: ಮಹಾರಾಷ್ಟ್ರ ಸಚಿವರು ಡಿ.3ರಂದು ಬೆಳಗಾವಿಗೆ ಆಗಮಿಸಿದ್ರೆ ಆಗುವ ಅನಾಹುತಕ್ಕೆ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತವೇ ಹೊಣೆ ಎಂದು ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಬುಧವಾರ ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಅವರನ್ನು ಭೇಟಿ ಮಾಡಿದ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಪದಾಧಿಕಾರಿಗಳು ಯಾವುದೇ ಕಾರಣಕ್ಕೂ ಮಹಾರಾಷ್ಟ್ರ ಸಚಿವರಿಗೆ ಬೆಳಗಾವಿ ಪ್ರವೇಶಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.
ಮಾಧ್ಯಮಗಳ ಜೊತೆಗೆ ಮಾತನಾಡಿದ ದೀಪಕ ಗುಡಗನಟ್ಟಿ ಮಹಾರಾಷ್ಟ್ರ ಸಚಿವರು ಭಾಷಾಸಾಮರಸ್ಯಕ್ಕೆ ಧಕ್ಕೆ ತರುವ ಕೆಲಸ ಮಾಡಿ ನಾಡದ್ರೋಹಿಗಳ ಜೊತೆಗೆ ಸೇರಿ ಸಭೆ ಮಾಡುತ್ತಿರುವುದಕ್ಕೆ ಕರವೇ ವಿರೋಧಿಸುತ್ತದೆ. ಹೀಗಾಗಿ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಯಾವುದೇ ಕಾರಣಕ್ಕೂ ಬೆಳಗಾವಿಗೆ ಮಹಾರಾಷ್ಟ್ರ ಸಚಿವರ ಪ್ರವೇಶಕ್ಕೆ ಅವಕಾಶ ಮಾಡಿಕೊಡಬಾರದು. ಒಂದು ವೇಳೆ ಮಹಾರಾಷ್ಟ್ರ ಸಚಿವರಿಗೆ ಅವಕಾಶ ಕೊಟ್ಟರೆ ಅದನ್ನು ಕರವೇ ಸಹಿಸುವುದಿಲ್ಲ. ಅವರು ಬಂದರೆ ಅವರಿಗೆ ಸರಿಯಾದ ಪಾಠ ಕಲಿಸುತ್ತೇವೆ. ಅವರ ವಿರುದ್ಧ ಹೋರಾಟ, ಪ್ರತಿಭಟನೆ ಮಾಡುತ್ತೇವೆ. ಆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದ್ರೆ ಅದಕ್ಕೆ ಜಿಲ್ಲಾಡಳಿತ, ಸರ್ಕಾರವೇ ಹೊಣೆ ಆಗುತ್ತದೆ. ಹೀಗಾಗಿ ಅಂತವರಿಗೆ ಕರ್ನಾಟಕ ಗಡಿ ಪ್ರವೇಶ ಮಾಡಲು ಅವಕಾಶ ಮಾಡಿಕೊಡಬಾರದು ಎಂದು ದೀಪಕ ಗುಡಗನಟ್ಟಿ ಆಗ್ರಹಿಸಿದರು.ಈ ಸಂದರ್ಭದಲ್ಲಿ ಕರವೇ ರಾಜ್ಯ ಸಂಚಾಲಕ ಮಹಾದೇವ ತಳವಾರ, ಕರವೇ ಮುಖಂಡ ಗಣೇಶ ರೋಖಡೆ, ರಮೇಶರಾವ ಯರಗಣ್ಣವರ ಸೇರಿ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.