





ಬೆಳಗಾವಿ: 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ನಿಮಿತ್ಯ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಶನಿವಾರ ಬೆಳಿಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಧ್ವಜಾರೋಹಣ ನೆರವೇರಿಸಿದರು.
ಪೊಲೀಸರು, ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನ ನಡೆಸಿದರು. ಸತೀಶ ಜಾರಕಿಹೊಳಿ ಅವರಿಗೆ ಗೌರವ ವಂದನೆ ಸ್ವೀಕರಿಸಿದರು. ಅಂಧ ಮಕ್ಕಳು, ಮಹಾನಗರ ಪಾಲಿಕೆ ಪೌರ ಕಾರ್ಮಿಕರ ತಂಡವು ಪಥಸಂಚಲನದಲ್ಲಿ ಭಾಗವಹಿಸಿ ಎಲ್ಲರ ಗಮನ ಸೆಳೆದರು.
ಸ್ವಾತಂತ್ರ್ಯ ಹೋರಾಟದಲ್ಲಿ ನಮ್ಮ ಬೆಳಗಾವಿ ಜಿಲ್ಲೆಯ ಪಾತ್ರವು ಕಡಿಮೆ ಇಲ್ಲ. ಅಪ್ರತಿಮ ಹೋರಾಟಗಾರರು, ಅಪ್ಪಟ ದೇಶಭಕ್ತರು, ಸ್ವಾಭಿಮಾನಿ ಸೇನಾನಿಗಳನ್ನು ದೇಶಕ್ಕೆ ಕೊಡುಗೆ ನೀಡಿರುವ ನಮ್ಮ ಜಿಲ್ಲೆಯು ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿತ್ತು ಎಂಬುದು ಎಲ್ಲರಿಗೂ ತಿಳಿದ ವಿಷಯ. ಕಿತ್ತೂರು ರಾಣಿ ಚೆನ್ನಮ್ಮ ಮೊಳಗಿಸಿದ ಸ್ವಾತಂತ್ರ್ಯದ ಕಹಳೆಯು ಕಾಡ್ಗಿಚ್ಚಿನಂತೆ ಎಲ್ಲೆಡೆ ಹಬ್ಬಿತು. ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆ ಹೊಂದಿದ್ದ ಚೆನ್ನಮ್ಮ, ಆಂಗ್ಲರ ಈಸ್ಟ್ ಇಂಡಿಯಾ ಕಂಪನಿಗೆ ದುಸ್ವಪ್ನವಾಗಿ ಕಾಡಿದಳು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಬಾಲಾನಾಯ್ಕ ಬಿನ್ ಮಲ್ಲಾನಾಯಕ, ಕಲಬಸಪ್ಪ ಬಿನ್ ಕಲ್ಲಪ್ಪ, ಭೀಮ ಜಿಡ್ಡಿಮನಿ, ಅಪ್ಪಾಜಿ ಕೆಂಚಾನಾಯಕ, ಬಸವಲಿಂಗಪ್ಪ ಮತ್ತು ಕೆಂಚಪ್ಪ ಬಿನ್ ರುದ್ರಪ್ಪ ಈ ಏಳು ಜನರು ಆಂಗ್ಲರ ಬಂದೂಕುಗಳಿಗೆ ಬೆದರದೇ ತಾಯ್ನಾಡಿನ ಸ್ವಾತಂತ್ರ್ಯಕ್ಕಾಗಿ ನಂದಗಡದಲ್ಲಿ ನೇಣುಗಂಬಕ್ಕೇರಿದ ಅಪ್ರತಿಮ ದೇಶಭಕ್ತರು. ಸಂಗೊಳ್ಳಿ ರಾಯಣ್ಣ ಹುಟ್ಟಿದ್ದು ಆಗಸ್ಟ್ 15ರಂದು ವೀರಮರಣವನ್ನಪ್ಪಿದ್ದು ಜನವರಿ 26 ಎಂದು ಸ್ಮರಿಸಿಕೊಂಡರು.
ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಮತ್ತೊಬ್ಬ ಮಹನೀಯರು ಶ್ರೀ ಗಂಗಾಧರ ದೇಶಪಾಂಡೆ. ‘ಕರ್ನಾಟಕದ ಸಿಂಹ’ ಹಾಗೂ ‘ಕರ್ನಾಟಕದ ಖಾದಿ ಭಗೀರಥ’ ಎಂದು ಗುರುತಿಸಿಕೊಂಡಿದ್ದ ದೇಶಪಾಂಡೆಯವರ ಕೊಡುಗೆ ಅಪಾರ. ಇವರ ಜತೆಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಅನೇಕರನ್ನು ಇಂದು ನಾವು ನೆನಪಿಸಿಕೊಳ್ಳಬೇಕು. ಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರವು ಅನೇಕ ಜನಪರ ಕಾರ್ಯಕ್ರಮಗಳನ್ನು ರೂಪಿಸಿದೆ. ಸಾಮಾಜಿಕ ನ್ಯಾಯ ಹಾಗೂ ಸಮಾನತೆಯ ಹಾದಿಯಲ್ಲಿ ದೃಢವಾದ ಹೆಜ್ಜೆಯನ್ನು ಇಟ್ಟಿದೆ ಎಂದು ಸತೀಶ ಜಾರಕಿಹೊಳಿ ಅಭಿಪ್ರಾಯ ಪಟ್ಟರು.
ಸ್ವಾತಂತ್ರ್ಯೋತ್ಸವದ ಈ ಸಂದರ್ಭದಲ್ಲಿ ಬೆಳಗಾವಿ ನಗರ ಸೇರಿದಂತೆ ನಮ್ಮ ಜಿಲ್ಲೆಯಲ್ಲಿ ಹಲವು ಅಭಿವೃದ್ಧಿ ಕೈಗೆತ್ತಿಕೊಂಡಿದ್ದೇವೆ. ಲೋಕೋಪಯೋಗಿ ಇಲಾಖೆಯಿಂದ ಬೆಳಗಾವಿ ನಗರದ ಸಂಕಮ ಹೋಟೆಲ್ ನಿಂದ ಅಶೋಕ ವೃತ್ತದ ಸಂಗೊಳ್ಳಿ ರಾಯಣ್ಣ ವೃತ್ತದ ಮುಖಾಂತರ ರಾಣಿ ಚೆನ್ನಮ್ಮ ವೃತ್ತದವರೆಗೆ ಫ್ಲೈ-ಓವರ್ ನಿರ್ಮಾಣಕ್ಕಾಗಿ ರೂ. 275.53 ಕೋಟಿ ಅನುದಾನ ಬಿಡುಗಡೆ ಆಗಿದೆ. ಇದೇ ಆಗಸ್ಟ್ 17 ಟೆಂಡರ್ ಸ್ವೀಕರಿಸಲು ಕೊನೆಯ ದಿನ. ಇನ್ನು ಕಾಮಗಾರಿಯ ಎರಡನೇ ಹಂತದಲ್ಲಿ ಚನ್ನಮ್ಮಾ ವೃತ್ತದಿಂದ ಧರ್ಮವೀರ ಸಂಭಾಜಿ ವೃತ್ತದವರೆಗೆ ಫ್ಲೈ-ಓವರ್ ನಿರ್ಮಾಣಕ್ಕಾಗಿ 240 ಕೋಟಿಗಳ ಅನುದಾನವು ಅನುಮೋದನೆಯಾಗಿದ್ದು, ಈ ಕಾಮಗಾರಿಗೆ ಡಿ.ಪಿ.ಆರ್ ತಯಾರಿಸಲು ವಿವಿಧ ಸ್ಥಳಗಳಲ್ಲಿ ಮಣ್ಣಿನ ಹಾಗೂ ಇತರೆ ಸ್ಥಳಗಳಲ್ಲಿ ಪರೀಕ್ಷೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 3 ವಿಭಾಗಗಳ (ಬೆಳಗಾವಿ, ಚಿಕ್ಕೋಡಿ ಹಾಗೂ ಧಾರವಾಡ) ಅಡಿಯಲ್ಲಿ ಒಟ್ಟು 16 ಬಸ್ ಘಟಕಗಳಿಂದ ಬಸ್ ಕಾರ್ಯಾಚರಣೆ ಮಾಡಲಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 16 ಬಸ್ ಘಟಕಗಳಿಂದ 1661 ಬಸ್ ಗಳು ಪ್ರತಿದಿನ ಕಾರ್ಯಾಚರಣೆ ಮಾಡಲಾಗುತ್ತಿದೆ.
ಶಕ್ತಿ ಯೋಜನೆ ಅಡಿಯಲ್ಲಿ 11- ಜೂನ್ -2023 ರಿಂದ 31-ಜುಲೈ 2026 ವರೆಗೆ (1147 ದಿನಗಳು) ಒಟ್ಟು 92.24 ಕೋಟಿ ಪ್ರಯಾಣಿಕರಲ್ಲಿ, 61.79 ಕೋಟಿ ಮಹಿಳಾ ಪ್ರಯಾಣಿಕರು (ಶೇಕಡಾ 67.0) ಪ್ರಯಾಣಸಿದ್ದು, 1,599 ಕೋಟಿ ರೂಪಾಯಿ ಮೊತ್ತದ ಶೂನ್ಯ ಟಿಕೆಟ್ ವಿತರಿಸಲಾಗಿದೆ ಎಂದು ಸತೀಶ ಜಾರಕಿಹೊಳಿ ಹೇಳಿದರು.
ಗೃಹಜ್ಯೋತಿ:
ಜಿಲ್ಲೆಯಲ್ಲಿ ಒಟ್ಟು 10.55 ಲಕ್ಷ ಅರ್ಹ ಫಲಾನುಭವಿಗಳಿದ್ದು, ಈ ಯೋಜನೆಯಡಿ ಒಟ್ಟು 10.33 ಲಕ್ಷ ಬಳಕೆದಾರರು ನೋಂದಾಯಿಸಿದ್ದು, ಎಲ್ಲ ಅರ್ಹ ಫಲಾನುಭವಿಗಳಿಗೆ ಗೃಹಜ್ಯೋತಿ ಯೋಜನೆಯಡಿ ಸರಾಸರಿ ಬಳಕೆಯ ಆಧಾರದ ಮೇಲೆ ಮಾಸಿಕ 200 ಯೂನಿಟ್ಗಳವರೆಗೆ ಉಚಿತವಾಗಿ ವಿದ್ಯುತ್ ನೀಡಲಾಗುತ್ತಿದೆ ಎಂದರು.
ಗೃಹಲಕ್ಷ್ಮೀ:
ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಯಡಿ, ಇಲ್ಲಿಯವರೆಗೆ 12.02 ಲಕ್ಷ ಫಲಾನುಭವಿಗಳು ನೋಂದಣಿಯಾಗಿರುತ್ತಾರೆ. ಇಲ್ಲಿಯವರೆಗೆ ಮಾಸಿಕ ರೂ.2000 ರಂತೆ 31 ಕಂತುಗಳಿಗೆ 6,824 ಕೋಟಿ ರೂಪಾಯಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಜಮೆಯಾಗಿರುತ್ತದೆ ಎಂದರು.
ಯುವನಿಧಿ:
ಯುವನಿಧಿ ಯೋಜನೆಯಡಿ 26, ಡಿಸೆಂಬರ್ 2023 ರಿಂದ ಮೇ-2026 ರ ಅಂತ್ಯ ದವರೆಗೆ ಜಿಲ್ಲೆಯಲ್ಲಿ ಪದವಿ ಮತ್ತು ಡಿಪ್ಲೋಮಾ ಪದವಿ ಪಡೆದ ನಿರುದ್ಯೋಗಿ ಅಭ್ಯರ್ಥಿಗಳು ಇಲ್ಲಿಯವರೆಗೆ ಒಟ್ಟು 51,119 ನೋಂದಣಿಯಾಗಿದ್ದು, ಯುವನಿಧಿ ಅರ್ಹತಾ ಮಾನದಂಡ ಪೂರೈಸಿದ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮೂಲಕ ಒಟ್ಟು 130 ಕೋಟಿ ರೂಪಾಯಿ ಪಾವತಿ ಮಾಡಲಾಗಿದೆ ಎಂದರು.
ಪ್ರಸಕ್ತ ಹಂಗಾಮಿನಲ್ಲಿ ಮೇ ಹಾಗೂ ಜೂನ್ ಮಾಹೆಯಲ್ಲಿ ಜಿಲ್ಲೆಯಾದ್ಯಂತ ಮಳೆ ಕೊರತೆ ಉಂಟಾಗಿರುವುದರಿಂದ ಮುಂಗಾರು ಬಿತ್ತನೆ ಪ್ರಾರಂಭವಾಗಲು ಸ್ವಲ್ಪ ಹಿನ್ನಡೆಯಾಗಿದ್ದರೂ ಜುಲೈ ತಿಂಗಳಲ್ಲಿ ಉತ್ತಮ ಮಳೆ ಆಗಿದ್ದರಿಂದ ರೈತರಿಗೆ ಅನುಕೂಲವಾಗಿ ಬಿತ್ತನೆ ಕಾರ್ಯ ಚುರುಕುಗೊಂಡಿರುತ್ತದೆ. ಜಿಲ್ಲೆಯಲ್ಲಿ ಒಟ್ಟು 7.52 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದ್ದು, ಇಲ್ಲಿಯವರೆಗೆ ಎಲ್ಲಾ ಬೆಳೆಗಳು ಸೇರಿದಂತೆ ಒಟ್ಟು 7.16 ಲಕ್ಷ ಹೆಕ್ಟೇರ್ ಶೇ.95% ರಷ್ಟು ಬಿತ್ತನೆಯಾಗಿದೆ. ಬಿತ್ತನೆಗೆ ಅಗತ್ಯವಿರುವ 2,87,390 ಮೆಟ್ರಿಕ್ ಟನ್ ವಿವಿಧ ರಸಗೊಬ್ಬರಗಳ ಪೂರೈಕೆಯಾಗಿದ್ದು, ಇಲ್ಲಿಯವರೆಗೆ ಸುಮಾರು 1,52,776 ಮೆಟ್ರಿಕ್ ಟನ್ ವಿವಿಧ ರಸಗೊಬ್ಬರಗಳ ವಿತರಣೆಯಾರುತ್ತದೆ ಎಂದು ಸತೀಶ ಜಾರಕಿಹೊಳಿ ತಿಳಿಸಿದರು.
ಲೋಕೋಪಯೋಗಿ ಇಲಾಖೆಯಿಂದ ಬೆಳಗಾವಿ ಜಿಲ್ಲಾಧಿಕಾರಿಗಳ ಕಟ್ಟಡ ನಿರ್ಮಾಣಕ್ಕಾಗಿ ರೂ. 55 ಕೋಟಿ ಕಂದಾಯ ಇಲಾಖೆಯಿಂದ ಹಾಗೂ ರೂ. 20 ಕೋಟಿ ಲೋಕೋಪಯೋಗಿ ಇಲಾಖೆಯಿಂದ ಬಿಡುಗಡೆಗೊಳಿಸಿ ಒಟ್ಟಾರೆಯಾಗಿ ರೂ. 75 ಕೋಟಿಗೆ ಡಿ.ಪಿ.ಆರ್ ತಯಾರಿಸಿ ಟಿ.ಎ. & ಇ.ಆರ್.ಸಿ. ಅನುಮೋದನೆ ಹಾಗೂ ಆಡಳಿತಾತ್ಮಕ ಅನುಮೋದನೆ ಪಡೆಯಲಾಗಿರುತ್ತದೆ. ಸದ್ಯ ಕಾಮಗಾರಿಯು ಟೆಂಡರ್ ಹಂತದಲ್ಲಿದ್ದು ಶೀಘ್ರವಾಗಿ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು. ಬೆಳಗಾವಿ ಜಿಲ್ಲೆಯಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣ ಕಾಮಗಾರಿಗೆ ರೂ. 10 ಕೋಟಿ ಅನುದಾನದಡಿ ಮಂಜೂರಾಗಿದ್ದು, ಸದರಿ ಕಾಮಗಾರಿಯು ಪ್ರಗತಿಯಲ್ಲಿದೆ ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಆಸೀಫ್ ಸೇಠ್, ಪ್ರಾದೇಶಿಕ ಆಯುಕ್ತೆ ಎಂ. ಜಾನಕಿ, ಐಜಿಪಿ ಸಂದೀಪ ಪಾಟೀಲ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿ.ಪಂ.ಸಿಇಒ ರಾಹುಲ್ ಶಿಂಧೆ, ನಗರ ಪೊಲೀಸ್ ಆಯುಕ್ತ ಭೂಷಣ ಬೊರಸೆ, ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ರಾಮರಾಜನ್ ಸೇರಿ ಮತ್ತಿತರರು ಇದ್ದರು.










